ಭಟ್ಕಳ: ಜಿಲ್ಲೆಯಲ್ಲಿ ಜುಲೈ ೧೨ ರಂದು ನಡೆಯುವ ರಾಷ್ಟ್ರೀಯ ಬೃಹತ್ ಲೋಕ ಅದಾಲತ್ನಲ್ಲಿ ರಾಜಿಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಅತಿ ಹೆಚ್ಚು ಸಂಖ್ಯೆಯಲ್ಲಿ ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ ಹಾಗೂ ಹಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧೀಶ ಕಾಂತ ಕುರಣಿ ಹೇಳಿದರು.
ಅವರು ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡುತ್ತಿದ್ದರು. ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಇವುಗಳ ಸಹಯೋಗದೊಂದಿಗೆ ಈಗಾಗಲೇ ತಾಲೂಕಿನ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ೩೨೩ ಪ್ರಕರಣಗಳನ್ನು, ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ೪೯೯ ಪ್ರಕರಣಗಳನ್ನು ಹಾಗೂ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ೯೧೯ ಪ್ರಕರಣಗಳನ್ನು ಗುರುತಿಸಲಾಗಿದ್ದು ಪ್ರಸ್ತುತ ದಾಖಲಾಗಿರುವ ಪ್ರಕರಣಗಳಲ್ಲಿ ಪಕ್ಷಗಾರರಿಗೆ ಹೊರೆಯಾಗದಂತೆ ಎರಡೂ ಪಕ್ಷಗಾರರ ಒಪ್ಪಿಗೆಯ ಮೇರೆ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗುವುದು. ಇಲ್ಲಿ ಪ್ರಕರಣ ಒಮ್ಮೆ ರಾಜೀಯಾಗಿ ಇತ್ಯರ್ಥವಾದರೆ ಅವುಗಳಿಗೆ ಅಪೀಲು ಕೂಡಾ ಇರುವುದಿಲ್ಲ. ಮತ್ತೆ ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥವಾಗುವುದರಿಂದ ಪರಸ್ಪರ ಪಕ್ಷಗಾರರಲ್ಲಿನ ಸ್ನೇಹ ಹಾಗೆಯೇ ಉಳಿಯುತ್ತದೆ ಎಂದ ಅವರು ಈಗಾಗಲೇ ಹಲವಾರು ಪಕ್ಷಗಾರರು, ವಕೀಲರು ಪ್ರಕರಣಗಳನ್ನು ರಾಜೀಯಾಗತಕ್ಕವು ಎಂದು ಗುರುತಿಸಲಾಗಿದ್ದು ಅವುಗಳ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ ಎಂದರು. ಲೋಕ ಅದಾಲತ್ನಲ್ಲಿ ಐ.ಪಿ.ಸಿ., ರಾಜೀಯಾಗತಕ್ಕ ಕ್ರಿಮಿನಲ್ ಪ್ರಕರಣ, ಚೆಕ್ ಬೌನ್ಸ್ ಪ್ರಕರಣ, ಬ್ಯಾಂಕ್ ಸಾಲ ವಸೂಲಾತಿ, ಮೋಟಾರು ವಾಹನ ಕಾಯಿದೆ ಉಲ್ಲಂಘನೆ ಪ್ರಕರಣ, ವಾಂಟಣಿ ಪ್ರಕರಣ, ಜಮೀನು ಸ್ವಾಧೀನ ಪ್ರಕರಣ, ಎಕ್ಸಿಕ್ಯೂಶನ್ ಪ್ರಕರಣ, ಮೊಟಾರು ವಾಹನ ಅಪಘಾತ ಪ್ರಕರಣ ಸೇರಿದಂತೆ ಇನ್ನೂ ಅನೇಕ ಪ್ರಕರಣಗಳು ರಾಜೀಯಾಗತಕ್ಕವಾಗಿದ್ದು ಪಕ್ಷಗಾರರು ನ್ಯಾಯಾಲಯದ ಆವರಣದಲ್ಲಿರುವ ಕಾನೂನು ಸೇವಾ ಸಮಿತಿಯನ್ನು ಸಂಪರ್ಕಿಸಬಹುದು ಎಂದೂ ತಿಳಿಸಿದ್ದಾರೆ. ಸಾರ್ವಜನಿಕರು ಲೋಕ್ ಅದಾಲತ್ ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿಯಾಗಬಲ್ಲ ಪ್ರಕರಣಗಳನ್ನು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಬಗೆಹರಿಸಿಕೊಳ್ಳುವ ಮೂಲಕ ಇದರ ಪ್ರಯೋಜನ
ಪಡೆದುಕೊಳ್ಳಬೇಕು ಎಂದೂ ಅವರು ಕೋರಿದರು. ಈ ಸಂದರ್ಭದಲ್ಲಿ ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿ ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶೆ ದೀಪಾ ಅರಳಗುಂಡಿ, ಹೆಚ್ಚುವರಿ ನ್ಯಾಯಾಧೀಶೆ ಧನವತಿ ಉಪಸ್ಥಿತರಿದ್ದರು.
ಜುಲೈ 12 ರಂದು ರಾಷ್ಟ್ರೀಯ ಬೃಹತ್ ಲೋಕ ಅದಾಲತ್: ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ ಹಾಗೂ ಹಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧೀಶ ಕಾಂತ ಕುರಣಿ ಮಾಹಿತಿ.
RELATED ARTICLES
